Saturday, July 20, 2013

ಅಮೃತಬಳ್ಳಿ (Tinospora cardiofolia)




"ಜ್ವರ, ಶೀತ, ಅಧಿಕ ರಕ್ತದೊತ್ತಡ, ನೋವು, ವಾತ, ಮೈಕೈನೋವು, ಕಾಮಾಲೆ, ರಕ್ತಹೀನತೆ, ಹೃದ್ರೋಗ, ದಡಾರ, ಉಗುರುಸುತ್ತು, ಅಲರ್ಜಿ, ಸುಟ್ಟಗಾಯ, ಋತುಸ್ರಾವದ ತೊಂದರೆ, ಎದೆ ಹಾಲು ಕೊರತೆ, ಗರ್ಭಿಣಿಯರ ನಂಜು, ಚರ್ಮರೋಗ ಮುಂತಾದ ಅನೇಕ ಕಾಯಿಲೆಗಳಿಗೆ ಔಷಧಿ ಅಮೃತಬಳ್ಳಿ. ಸಕ್ಕರೆ ಖಾಯಿಲೆಗೆ ಅಮೃತಬಳ್ಳಿ ಎಲೆ, ಬೇವಿನ ಎಲೆ, ಬಿಲ್ವಪತ್ರೆಗಳನ್ನು ಒಣಗಿಸಿ ಪುಡಿಮಾಡಿ ಪ್ರತಿದಿನ ಬೆಳಿಗ್ಗೆ ಒಂದು ಚಮಚ ನೀರಿನೊಂದಿಗೆ ಸೇವಿಸಿದರೆ ಆರೋಗ್ಯ ಉತ್ತಮಗೊಳ್ಳುತ್ತದೆ. ಇದರ ಕಾಂಡದ ಕಷಾಯ ಶೀತ, ಕೆಮ್ಮು ಹಾಗೂ ಜ್ವರಕ್ಕೆ ಔಷಧಿ. ಹಾವು, ಚೇಳುಗಳ ಕಡಿತಕ್ಕೆ ಇದರ ಕಾಂಡವನ್ನು ತೇಯ್ದು ಹಚ್ಚಿದರೆ ವಿಷ ಕಡಿಮೆಯಾಗುತ್ತದೆ" 

ಇದು ತ್ರಿದೋಷ ಗಳಿಂದ (ಅಂದರೆ ವಾತ, ಪಿತ್ತ, ಕಫ) ಉಂಟಾದ ತೊಂದರೆಗಳನ್ನು ನಿವಾರಿಸುತ್ತದೆ.
ಎಲ್ಲ ಬಗೆಯ ಜ್ವರಗಳಿಗೂ ಅಮೃತ ಬಳ್ಳಿ ಪರಿಣಾಮಕಾರಿ ಔಷಧಿ.

ಅಮೃತ ಬಳ್ಳಿಯ ಕಾಂಡವನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿಯಂತೆ (ಆಹಾರ ಸೇವನೆಗೆ ಮುಂಚೆ) ಸೇವಿಸಬೇಕು. ಅಮೃತ ಬಳ್ಳಿಯ ಕಾಂಡವನ್ನು ಇತರ ಔಷಧೀಯ ಸಸ್ಯಗಳೊಂದಿಗೆ ಬೆರೆಸಿ ಕಷಾಯ ಮಾಡಿ ಕುಡಿಯಬಹುದು.(ಸಂಬಾರ ಬಳ್ಳಿ, ಅಮೃತ ಬಳ್ಳಿ ಎಲೆ, ಮಜ್ಜಿಗೆ ಸೊಪ್ಪು, ತುಳಸಿ,ಲವಂಗ ತುಳಸಿ, ಅರಸಿನ ಪುಡಿ ,ಕಾಳುಮೆಣಸು,ಜೀರಿಗೆ,ಶುಂಠಿ).

ಇದರ ಐದಾರು ಎಲೆಗಳನ್ನು ಪ್ರತಿನಿತ್ಯ ಸೇವಿಸಬಹುದು. ಎಲೆಯು ಸ್ವಲ್ಪ ಕಹಿ ಮತ್ತು ಒಗರಿನಿಂದ ಕೂಡಿದೆ.ಎಲೆ ಮತ್ತು ಕಾಂಡದಿಂದ ತಂಬುಳಿ ತಯಾರಿಸಬಹುದು.ಎಲೆ ಮತ್ತು ಕಾಂಡವನ್ನು ಜೀರಿಗೆಯೊಂದಿಗೆ ನುಣ್ಣಗೆ ಅರಿಯಬೇಕು. ಅದಕ್ಕೆ ಮಜ್ಜಿಗೆ ಸೇರಿಸಿ ಸಾಸಿವೆ ಒಗ್ಗರಣೆ ಕೊಟ್ಟರೆ ತಂಬುಳಿ ತಯಾರು.ಈ ಬಳ್ಳಿಯ ಮೇಲೆ ಬೀಸಿ ಬರುವ ಗಾಳಿಯು ಆರೋಗ್ಯಕ್ಕೆ ಹಿತಕಾರಿ ಮತ್ತು ಮನೆಗೆ ತಂಪು.

*ಒಂದು ಹಿಡಿ ಅಮೃತಬಳ್ಳಿಯನ್ನು ಜಜ್ಜಿ 4 ಲೋಟ ನೀರಿನಲ್ಲಿ ಹಾಕಿ ಕುದಿಸಿ ಒಂದು ಲೋಟಕ್ಕೆ ಇಳಿದ ಮೇಲೆ ಕಷಾಯವನ್ನು ಶೋಧಿಸಿ, ದಿನಕ್ಕೆ ಮೂರ್ನಾಲ್ಕು ಬಾರಿ 50 ಮಿಲಿ ಕುಡಿಯಬೇಕು. ಮಕ್ಕಳಿಗೆ 25 ಮಿಲಿ ಕೊಟ್ಟಲ್ಲಿ ಸಾಕಾಗುತ್ತದೆ.